ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿದ್ದ, ಹಿರಿಯ ಸಾಹಿತಿ ದೇ.ಜವರೇಗೌಡ ಅವರು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಸಾಹಿತ್ಯ ವಲಯದಲ್ಲಿ ದೇ.ಜ.ಗೌ. ಎಂದೇ ಖ್ಯಾತರಾಗಿದ್ದ ದೇ. ಜವರೇಗೌಡ 1918 ರ ಜುಲೈ 8ರಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆಯಲ್ಲಿ ಜನಿಸಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. ಕುವೆಂಪು ಅವರಿಂದ ಪ್ರಭಾವಿತರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಕೊಂಡರು.
1946 ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗದ ಅಧ್ಯಾಪಕರಾಗಿ ಅವರು ವೃತ್ತಿಯನ್ನು ಆರಂಭಿಸಿದ್ದರು. 1969 ರಿಂದ 1975 ರವರೆಗೆ ಮೈಸೂರು ವಿಶ್ವವಿದ್ಯಾಲಯದ ವಿ.ಸಿ.ಯಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯದ ವಿವಿಧ ಪ್ರಾಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಅವರು ಬರೆದಿದ್ದಾರೆ.
1970 ರಲ್ಲಿ ಬೆಂಗಳೂರಿನಲ್ಲಿ ನಡೆದ 47 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ದೇ.ಜ.ಗೌ. ಅವರಿಗೆ 1975 ರಲ್ಲಿ ಕರ್ನಾಟಕ ವಿವಿ ಗೌರವ ಡಾಕ್ಟರೇಟ್ ಪದವಿ ನೀಡಿತ್ತು. 2001 ರಲ್ಲಿ ಪದ್ಮಶ್ರೀ, 2008 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ, 1998 ರಲ್ಲಿ ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳಿಗೆ ಅವರು ಭಾಜನರಾಗಿದ್ದರು.